ಮಂಗಳೂರು, ಆಗಸ್ಟ್ 28: ಬಿಜೆಪಿ ಮಂಗಳೂರು ನಗರ ದಕ್ಷಿಣದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ಪೂಜ್ಯರ ಪ್ರತಿಮೆಗೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿ ಹಿಂದುಳಿದವರ ಸಹಿತ ಸರ್ವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಇಂತಹ ಮಹಾನ್ ಸಂತರ ಗೌರವಾರ್ಥ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಮಂಗಳೂರಿನ ಹೃದಯ ಭಾಗದಲ್ಲಿರುವ ಈ ವೃತ್ತಕ್ಕೆ ನಾರಾಯಣಗುರು ವೃತ್ತ ಎಂದು ಮರುನಾಮಕರಣ ಮಾಡಿ, ಪೂಜ್ಯರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು.

ನಂತರ ಉರ್ವದಲ್ಲಿ ಗುರುಗಳ ಸುಂದರವಾದ ಮಂದಿರ ಕಟ್ಟಲಾಗಿತ್ತು. ಅಲ್ಲದೇ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನೂ ಸಹ ಅಸ್ತಿತ್ವಕ್ಕೆ ತರಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಮೂರು ವರ್ಷಗಳ ನಂತರ ಕಾಟಾಚಾರಕ್ಕೆ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿತು.

ಆದರೆ ಪ್ರತಿ ವರ್ಷ 500 ಕೋಟಿ ಕೊಡುವುದಾಗಿ ನೀಡಿದ್ದ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಒಂದು ಪೈಸೆಯನ್ನೂ ನೀಡದೇ ಸಮುದಾಯದ ಅಭಿವೃದ್ಧಿ ಕಡೆಗಣಿಸಿರುವುದು ಅತ್ಯಂತ ಬೇಸರದ ಸಂಗತಿ ಎಂದರು.

ಈ ಸಂದರ್ಭದಲ್ಲಿ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಮೂಡಾ ಮಾಜಿ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪ್ರಮುಖರಾದ ಮಹೇಶ್ ಜೋಗಿ, ಅರುಣ್ ಉರ್ವ, ಸುಕೇಶ್, ಕಿರಣ್, ನಿತಿನ್ ಕುಮಾರ್, ನಿಕಟ ಪೂರ್ವ ಪಾಲಿಕೆ ಸದಸ್ಯರುಗಳು ಸೇರಿದಂತೆ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

_Sathish Kapikad 

Share.
Leave A Reply

Exit mobile version